'ಗೃಹ ಆರೋಗ್ಯ’ ಯೋಜನೆ ಬಗ್ಗೆ ನಿಮಗೆಷ್ಟು ಗೊತ್ತು!? ರಾಜ್ಯ ಸರ್ಕಾರದ ಹೊಸ ಸ್ಕೀಮ್ ನ ವಿವರ ಇಲ್ಲಿದೆ!

ಬೆಂಗಳೂರು:- ಇತ್ತೀಚೆಗೆ ಹೆಚ್ಚಿನ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆಧುನಿಕ ಜೀವನ ಶೈಲಿ ಸೇರಿದಂತೆ ಅನೇಕ ಕಾರಣಗಳಿಂದ ಆರೋಗ್ಯ ಸಮಸ್ಯೆಗಳು ಗಂಭೀರವಾಗುತ್ತಿವೆ. ಇನ್ನು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ಪ್ರಮುಖ ಕಾರಣವಾಗಿವೆ. ಆದರೆ ಹೆಚ್ಚಿನ ಜನರು ತಮಗೆ ಸಕ್ಕರೆ ಕಾಯಿಲೆ, ರಕ್ತದೊತ್ತಡ ಇದ್ದರೂ ತಪಾಸಣೆ ಮಾಡಿಸಿಕೊಳ್ಳುತ್ತಿಲ್ಲ, ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ. ಇದಕ್ಕಾಗಿ ಆರೋಗ್ಯ ಇಲಾಖೆ, ರಾಜ್ಯದ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ರಾಜ್ಯದಲ್ಲಿ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ಇದರ ಅಂಗವಾಗಿ ಕರ್ನಾಟಕ ಆರೋಗ್ಯ ಇಲಾಖೆಯು, ಮನೆ ಮನೆಗೆ ತೆರಳಿ ಚಿಕಿತ್ಸೆ ಜೊತೆ ಉಚಿತ ಔಷಧಿ ನೀಡುವ ‘ಗೃಹ ಆರೋಗ್ಯ’ ಯೋಜನೆ ಆರಂಭಿಸಿದೆ.
ಈ ಯೋಜನೆ ಅಂಗವಾಗಿ ಜನವರಿಯಿಂದ ಆರೋಗ್ಯ ಇಲಾಖೆ ಸಿಬ್ಬಂದಿ ರಾಜ್ಯದ ಪ್ರತಿ ಮನೆಗೂ ತೆರಳಿ ಮಾನಸಿಕ ಆರೋಗ್ಯ ಸಮಸ್ಯೆಗಳು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ
ಈ ಬಗ್ಗೆ ಮಾತನಾಡಿದ ದಿನೇಶ್ ಗುಂಡೂರಾವ್, ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರು ರಾಜ್ಯದಾದ್ಯಂತ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅಧಿಕ ರಕ್ತದೊತ್ತಡ ಅಥವಾ ಮಧುಮೇಹದಿಂದ ಬಳಲುತ್ತಿರುವ ಜನರು ನಿರಂತರ ಔಷಧಿಗಳನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸಲಿದ್ದಾರೆ. ಅನೇಕ ರೋಗಿಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಅಲ್ಪಾವಧಿಯ ನಂತರ ವೈದ್ಯರು ಸೂಚಿಸಿದ ಚಿಕಿತ್ಸೆ, ಔಷಧ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಇದಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ತಪಾಸಣೆಯ ಜೊತೆಗೆ, ಗೃಹ ಆರೋಗ್ಯ ಯೋಜನೆಯಡಿ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಲಾಗುವುದು. ಖಿನ್ನತೆಯಂತಹ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಡೆಗಣಿಸಲಾಗುತ್ತದೆ. ಅಲ್ಲಿ ಮೆಮೊರಿ ನಷ್ಟದಂತಹ ಪರಿಸ್ಥಿತಿಗಳನ್ನು ಸಾಮಾನ್ಯವಾಗಿ ತಪ್ಪಾಗಿ ಅರ್ಥೈಸಲಾಗುತ್ತದೆ. ಇದರ ನಿವಾರಣೆಗೆ ಮಾನಸಿಕ ಆರೋಗ್ಯ ತಪಾಸಣೆ, ಚಿಕಿತ್ಸೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






