ತಿರುಪತಿ ಲಡ್ಡು ವಿವಾದ; ವಿಶೇಷ ತನಿಖಾ ತಂಡದಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ: ತಿರುಪತಿ ದೇವಸ್ಥಾನದ ಲಡ್ಡು ವಿವಾದ ಇನ್ನೂ ಹಸಿಯಾಗೇ ಇದೆ. ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ತಿರುಪತಿ ಲಡ್ಡು ವಿವಾದವನ್ನು ಸ್ವತಂತ್ರವಾದ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಹೇಳಿದೆ. ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದೆ.
ಈ ಪ್ರಕರಣದ ತನಿಖೆಗೆ ಸ್ವತಂತ್ರ ತನಿಖಾ ತಂಡ ಅಗತ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ಹೊಸದಾಗಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಪ್ರಕರಣದ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಅಧಿಕಾರಿಗಳನ್ನು ಒಳಗೊಂಡಿರುವ ಐದು ಸದಸ್ಯರುಗಳ ಹೊಸ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು. ಈ ವೇಳೆ ತಿರುಪತಿ ವಿಚಾರದಲ್ಲಿ ರಾಜಕೀಯ ನಾಟಕವನ್ನು ನೋಡಲು ನಾವು ಬಯಸುವುದಿಲ್ಲ. ಏಕೆಂದರೆ ಇದು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ಹೇಳಿದೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






