ವಿಧಾನಸೌಧದಲ್ಲೇ ನನ್ನ ಮೇಲೆ ಅತ್ಯಾಚಾರ: BJP ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕಸ್ಟಡಿಗೆ ಪಡೆದಿರುವ ಎಸ್ಐಟಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಹೋಗಿ ಮುನಿರತ್ನ ಅವರನ್ನು ವಶಕ್ಕೆ ಪಡೆದು ಸಿಐಡಿ ಕಚೇರಿಗೆ ಕರೆತಂದಿದ್ದರು.
ಮತ್ತೊಂದೆಡೆ ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಆತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಮಾತ್ರವಲ್ಲದೇ ಸರ್ಕಾರಿ ಕಾರಿನಲ್ಲೂ ಸಹ ಅತ್ಯಾಚಾರವೆಸಗಿರುವುದಾಗಿ ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಈ ಆರೋಪ ಮುನಿರತ್ನಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿವೆ.
ವಿಚಾರಣೆಯಲ್ಲಿ ಮುನಿರತ್ನ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಕೆಲ ಸಾಕ್ಷ್ಯಾಧಾರಗಳನ್ನು ಮುಂದೆ ಇಟ್ಟು ವಿಚಾರಣೆ ನಡೆಸಲಾಯಿತು. ಆದರೆ, ಮುನಿರತ್ನ ತನಿಖೆಗೆ ಸಹಕರಿಸುತ್ತಿಲ್ಲ. ''ನನಗೆ ಏನೂ ತಿಳಿದಿಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ'' ಎಂದಷ್ಟೇ ಉತ್ತರಿಸಿ ಆರೋಪಗಳನ್ನೆಲ್ಲಾ ಅಲ್ಲಗಳೆದಿದ್ದಾರೆ,'' ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






