ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ..!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೊಕದ್ದಮೆ 2023ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ.
ಕಾಂಗ್ರೆಸ್ ಪಕ್ಷವು ಮೇ 5, 2023ರಂದು ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ "ಭ್ರಷ್ಟಾಚಾರ ದರ ಪಟ್ಟಿ" ಎಂಬ ಹೆಸರಿನಲ್ಲಿ ಜಾಹೀರಾತು ನೀಡಿತ್ತು. ಈ ಜಾಹೀರಾತಿನಲ್ಲಿ, ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರವು ವಿವಿಧ ಹುದ್ದೆಗಳಿಗೆ ಲಂಚದ ದರ ನಿಗದಿಪಡಿಸಿದ್ದರೆಂದು ಆರೋಪಿಸಲಾಗಿತ್ತು. ಜೊತೆಗೆ "40% ಕಮಿಷನ್ ಸರ್ಕಾರ" ಎಂದು ಆಪಾದಿಸಿ, ನಾಲ್ಕು ವರ್ಷಗಳಲ್ಲಿ ₹1.5 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ ಎಂಬ ಆರೋಪವೂ ಹೊರ ಹಾಕಿತ್ತು.
ಈ ಜಾಹೀರಾತು ಬಿಜೆಪಿಯ ಗೌರವಕ್ಕೆ ಧಕ್ಕೆ ತರುತ್ತದೆ ಎಂಬ ಕಾರಣದ ಮೇಲೆ, ಪಕ್ಷವು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು. ಈ ದೂರು ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಅಧ್ಯಕ್ಷತೆಯಲ್ಲಿನ ಏಕಸದಸ್ಯ ಪೀಠ, ಮೊಕದ್ದಮೆಗೆ ತಾತ್ಕಾಲಿಕ ತಡೆ ನೀಡಿದೆ. ಇದೀಗ ಮುಂದಿನ ಹಂತದಲ್ಲಿ ಹೈಕೋರ್ಟ್ನಲ್ಲಿ ಈ ಪ್ರಕರಣದ ತೀರ್ಮಾನ ನಿರೀಕ್ಷೆಯಲ್ಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






