ಹೈಕಮಾಂಡ್ ಒಪ್ಪಿದ್ರೆ 5 ವರ್ಷವೂ ನಾನೇ ಮುಖ್ಯಮಂತ್ರಿ: ಸಿಎಂ ಸಿದ್ದರಾಮಯ್ಯ!
ಮಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವವನ್ನು ಕೇಂದ್ರೀಕರಿಸಿ ‘ನವೆಂಬರ್ ಕ್ರಾಂತಿ’ ಚರ್ಚೆಗಳು ಪ್ರಚಲಿತದಲ್ಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯು ಈ ಚರ್ಚೆಗಳಿಗೆ ಮತ್ತಷ್ಟು ಕಾರಣವಾಗಿದೆ. ಇದರ ನಡುವೆ ಹೈಕಮಾಂಡ್ ಒಪ್ಪಿದ್ರೆ 5 ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?