5 ಹುಲಿಗಳ ದುರಂತ ಅಂತ್ಯ ಕೇಸ್’ಗೆ ಟ್ವಿಸ್ಟ್: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ!

ಚಾಮರಾಜನಗರದ ಮಲೆಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಅಸಹಜವಾಗಿ ಸಾವಿಗೀಡಾಗಿವೆ. ವಿಷಪ್ರಾಶನದ ಶಂಕೆ ವ್ಯಕ್ತವಾಗಿದ್ದು, ಉನ್ನತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಸಚಿವ ಈಶ್ವರ ಖಂಡ್ ಅವರುರೆ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.
ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸದ್ಯ ಎಲ್ಲಾ 5 ಹುಲಿಗಳ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ನಿನ್ನೆ ತಾಯಿ ಹುಲಿ ಮರಣೋತ್ತರ ಪರೀಕ್ಷೆ ನಡೆದಿತ್ತು. ಇಂದು ನಾಲ್ಕು ಹುಲಿ ಮರಿಗಳ ಮರಣೋತ್ತ ಪರೀಕ್ಷೆಯನ್ನು ವೈದ್ಯರು ನಡೆಸಿದ್ದಾರೆ.
ಎಪಿಸಿಸಿಎಫ್ ನೇತೃತ್ವದಲ್ಲಿ, ಪ್ರಾಣಿ ಶಾಸ್ತ್ರಜ್ಞರು ಹಾಗೂ ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆದಿದೆ. ಹುಲಿಗಳ ಮೃತ ದೇಹದ ಪ್ರಮುಖ ಅಂಗಾಂಗಳನ್ನ ಸಿಬ್ಬಂದಿ ಸಂಗ್ರಹಣೆ ಮಾಡಿದ್ದಾರೆ. ಮೂರು ಗುಂಪುಗಳಲ್ಲಿ ಮಾದರಿ ಸಂಗ್ರಹಿಸಿ ಪ್ರತ್ಯೇಕವಾಗಿ ಮೂರು ಲ್ಯಾಬ್ ಗಳಿಗೆ ಸ್ಯಾಂಪಲ್ ಗಳ ರವಾನೆ ಮಾಡಲಾಗಿದೆ.
ಐದು ಹುಲಿಗಳು ಒಮ್ಮಲೇ ಮೃತಪಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ತನಿಖೆಗೆ ಪಿಸಿಸಿಎಫ್ ನೇತೃತ್ವದಲ್ಲಿ ಉನ್ನತ ಮಟ್ಟದ ತಂಡ ರಚಿಸಿ ಗುರುವಾರ ಸಂಜೆ ಆದೇಶ ಹೊರಡಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿಷಪ್ರಾಶನದಿಂದ ಮೃತಪಟ್ಟಿದ್ದರೆ ಅದಕ್ಕೆ ಕಾರಣರಾಗಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಚಿವರು ಈಗಾಗಲೇ ಆದೇಶಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






