Janardhan Reddy: ಜನಾರ್ದನ್ ರೆಡ್ಡಿಗೆ ಜೈಲು ಫಿಕ್ಸ್..! ಶಾಸಕ ಸ್ಥಾನಕ್ಕೆ ಕುತ್ತು? ಏನಿದು ಪ್ರಕರಣ?

ನವದೆಹಲಿ: ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕೇಸ್ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿತ್ತು.
ಆರೋಪ ಪ್ರಕರಣದ ವಾದ - ಪ್ರತಿವಾದವನ್ನು ಆಲಿಸಿದ ಸಿಬಿಐ ನ್ಯಾಯಾಲಯವು ಮೇ 6ಕ್ಕೆ ತೀರ್ಪು ನೀಡಿದೆ. ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆ ನಡೆದಿತ್ತು. ಮೂರು ಸಾವಿರಕ್ಕೂ ಅಧಿಕ ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು.
ಮಾಜಿ ಸಚಿವ ಮತ್ತು ಹಾಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿ 8 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 420, 409, 468 ಮತ್ತು 471 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(2) ಜೊತೆಗೆ 13(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಜನಾರ್ದನ್ ರೆಡ್ಡಿಗೆ ಜೈಲು ಫಿಕ್ಸ್
ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದ್ದು, 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಜೈಲು ಸೇರುವುದು ಖಚಿತವಾಗಿದೆ. ಜಾಮೀನಿಗಾಗಿ ಹೈದರಾಬಾದ್ನ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕು.
ಏನಿದು ಪ್ರಕರಣ?
ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿಗೆ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ವಿಚಾರದಲ್ಲಿ ಅಕ್ರಮವಾಗಿದೆ ಎಂಬ ಆರೋಪವಿದೆ. ಅಂದಿನ ಅವಿಭಜಿತ ಆಂಧ್ರ ಪ್ರದೇಶ ಸರ್ಕಾರ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವ ವೇಳೆ ಇತರೆ ಎಲ್ಲಾ ಗುತ್ತಿಗೆದಾರರನ್ನು ಬಿಟ್ಟು ಒಎಂಸಿ ಕಂಪನಿಗೆ ಗುತ್ತಿಗೆ ಕೊಡಿಸಿತ್ತು ಎಂಬ ಆರೋಪವೂ ಇತ್ತು. ಸಿಬಿಐ 2009 ರಲ್ಲಿ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ತನಿಖೆ ಪ್ರಾರಂಭಿಸಿತ್ತು. ಈ ಅಕ್ರಮದಿಂದ ಆಂಧ್ರ ಪ್ರದೇಶ ಸರ್ಕಾರಕ್ಕೆ 884 ಕೋಟಿ ರೂ. ನಷ್ಟ ಎಂದು ಸಿಬಿಐ ತನಿಖೆ ಮಾಡಿ ಬೆಳಕಿಗೆ ತಂದಿತ್ತು.
ಯಾರೆಲ್ಲಾ ಆರೋಪಿಗಳು?
- ಶಾಸಕ ಗಾಲಿ ಜನಾರ್ದನ ರೆಡ್ಡಿ
- ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದಂ
- ತೆಲಂಗಾಣದ ಮಾಜಿ ಸಚಿವೆ ಹಾಗೂ ಹಾಲಿ ಶಾಸಕಿ ಸಬಿತಾ ಇಂದ್ರಾರೆಡ್ಡಿ
- 2022ರಲ್ಲಿ ಸೇವೆಯಿಂದ ಬಿಡುಗಡೆಯಾದ ಐಎಎಸ್ ಅಧಿಕಾರಿ ವೈ. ಶ್ರೀಲಕ್ಷ್ಮಿ
- ಅಂದಿನ ಗಣಿ ಇಲಾಖೆಯ ಸಹಾಯಕ ನಿರ್ದೇಶಕ ದಿವಂಗತ ಆರ್. ಲಿಂಗಾ ರೆಡ್ಡಿ
- ಒಎಂಸಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ ಶ್ರೀನಿವಾಸ ರೆಡ್ಡಿ
- ಜನಾರ್ದನ ರೆಡ್ಡಿ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್
- ಗಣಿ ಇಲಾಖೆಯ ಮಾಜಿ ನಿರ್ದೇಶಕ ವಿ ಡಿ ರಾಜಗೋಪಾಲ್
ನಿಮ್ಮ ಪ್ರತಿಕ್ರಿಯೆ ಏನು?






