RSS ಸೇರಿ ಖಾಸಗಿ ಚಟುವಟಿಕೆಗಳಿಗೆ ಬ್ರೇಕ್: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ
ಬೆಂಗಳೂರು: ಕರ್ನಾಟಕ ಸರ್ಕಾರವು ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ನಿಯಂತ್ರಿಸಲು ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಈ ಕುರಿತು ಹೊಸ ನಿಯಮ ತರಲು ನಿರ್ಧರಿಸಿದೆ.
2013ರ ಬಿಜೆಪಿ ಸರ್ಕಾರದ ಆದೇಶವನ್ನು ಆಧಾರವನ್ನಾಗಿ ಮಾಡಿಕೊಂಡು, ತಮಿಳುನಾಡು ಸರ್ಕಾರ ಜಾರಿಗೆ ತಂದ ನಿಯಮದ ಮಾದರಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಪ್ರಕಾರ, ಮುಂದಿನ ದಿನಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ ಅಥವಾ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಲಿದೆ.
ಸರ್ಕಾರ ತನ್ನ ತೀರ್ಮಾನದಲ್ಲಿ ನೇರವಾಗಿ ಆರ್ಎಸ್ಎಸ್ (RSS) ಎಂಬ ಪದವನ್ನು ಬಳಸದೇ, “ಖಾಸಗಿ ಸಂಸ್ಥೆಗಳು” ಎಂಬ ಸಾಮಾನ್ಯ ಉಲ್ಲೇಖ ಮಾಡಿದೆ. ಈ ಮೂಲಕ ಯಾವುದೇ ಸಂಘಟನೆಗೆ ವಿಶೇಷವಾಗಿ ಗುರಿ ಮಾಡದಂತೆ ಜಾಣ್ಮೆಯ ನಡೆ ತೋರಿಸಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಹೊಸ ನಿಯಮ ಜಾರಿಗೆ ಬಂದರೆ ಆರ್ಎಸ್ಎಸ್ ಸೇರಿದಂತೆ ಎಲ್ಲಾ ಖಾಸಗಿ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಸಭೆ, ತರಬೇತಿ ಅಥವಾ ಕಾರ್ಯಕ್ರಮಗಳನ್ನು ಆಯೋಜಿಸಲು ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ.
ಈ ವಿಷಯದ ಕುರಿತಾಗಿ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಸಲಹೆ ನೀಡಿದ್ದರು.
ಸದ್ಯ, ಸಚಿವ ಸಂಪುಟದ ತೀರ್ಮಾನದ ನಂತರ ನಿಯಮದ ಕರಡು ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ.
ನಿಮ್ಮ ಪ್ರತಿಕ್ರಿಯೆ ಏನು?