Actor Darshan: ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಪ್ರೀತಿಯ ಸೆಲೆಬ್ರಿಟಿಗಳಿಗೆ ಬಹಿರಂಗ ಪತ್ರ ಬರೆದ ನಟ ದರ್ಶನ್..!

ನಟ ದರ್ಶನ್, ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡು ಎಂಟು ತಿಂಗಳಿಗೂ ಹೆಚ್ಚು ಸಮಯವಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರುವ ಮುಂಚೆ ದರ್ಶನ್ ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದರು.
ಸಿನಿಮಾದ ಚಿತ್ರೀಕರಣ 50 % ಹೆಚ್ಚು ಮುಗಿದಿತ್ತು, 2024 ಡಿಸೆಂಬರ್ನಲ್ಲಿ ಸಿನಿಮಾ ಬಿಡುಗಡೆ ಮಾಡುವ ಆಲೋಚನೆ ದರ್ಶನ್ ಹಾಗೂ ಚಿತ್ರತಂಡಕ್ಕೆ ಇತ್ತು, ಆದರೆ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ, ಸಿನಿಮಾ ಅರ್ಧಕ್ಕೆ ನಿಂತು ಹೋಯ್ತು. ಆದರೆ ರ್ಶನ್ ಹುಟ್ಟುಹಬ್ಬದಂದು ‘ಡೆವಿಲ್’ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿತ್ತು.
ಅದಲ್ಲದೆ 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಅವರ ಅಪಾರ ಅಭಿಮಾನಿಗಳು ತುಂಬು ಹೃದಯದಿಂದ ಶುಭಾಶಯ ಕೋರಿ, ‘ಒಳ್ಳೆಯದಾಗಲಿ’ ಎಂದು ಹಾರೈಸಿದ್ದರು.
ಇದೀಗ ಹುಟ್ಟುಹಬ್ಬಕ್ಕೆ ಕೆಲ ದಿನಗಳ ಮುಂಚಿತವಾಗಿಯೇ ವಿಡಿಯೋ ಹಂಚಿಕೊಂಡಿದ್ದ ದರ್ಶನ್, ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದಿದ್ದರು. ಇದೀಗ ಹುಟ್ಟುಹಬ್ಬ ಆಗಿ ಎರಡು ದಿನಗಳ ಬಳಿಕ ಪ್ರೀತಿಯ ಅಭಿಮಾನಿಗಳಿಗಾಗಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.
ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಎಂದೇ ಕರೆಯುವ ದರ್ಶನ್, ‘ಪ್ರೀತಿಯ ಸೆಲೆಬ್ರಿಟಿಗಳೇ, ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ
. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ’ ಎಂದಿದ್ದಾರೆ.
‘ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ’ ಎಂದಿದ್ದಾರೆ ದರ್ಶನ್.
ನಿಮ್ಮ ಪ್ರತಿಕ್ರಿಯೆ ಏನು?






