B.Sriramulu: ರಾಜ್ಯಸಭೆ ಸ್ಥಾನದ ಮೇಲೆ ಕಣ್ಣಿಟ್ರಾ ಶ್ರೀರಾಮುಲು..! ಮುಂದಿನ ಪ್ಲಾನ್ ಏನೂ..?

ಬೆಂಗಳೂರು: ಕೋರ್ ಕಮಿಟಿ ಸಭೆ ಬಳಿಕ ತೀವ್ರ ಅಸಮಾಧಾನಗೊಂಡ ಮಾಜಿ ಸಚಿವ ಶ್ರೀರಾಮುಲು ಆಪ್ತ ಜನಾರ್ದನ ರೆಡ್ಡಿ ವಿರುದ್ಧ ಸಮರ ಸಾರುತ್ತಿದ್ದಾರೆ. ಇಬ್ಬರು ನಾಯಕರ ಮಾತಿನ ಫೈಟ್ನಿಂದ ರಾಜ್ಯ ಬಿಜೆಪಿ ಮುಜುಗರಕ್ಕೀಡಾಗಿದೆ. ಕೆಲ ದಿನಗಳ ಹಿಂದೆ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಶ್ರೀರಾಮುಲು, ರೆಡ್ಡಿ ವಿರುದ್ಧ ರಾಂಗ್ ಆಗಿದ್ದರು.
ರಾಧಾಮೋಹನ್ ದಾಸ್ ಅಗರ್ವಾಲ್ ಮಾತಿನಿಂದ ಮನ ನೊಂದು ಪಕ್ಷ ಬಿಡಲು ಸಿದ್ಧ ಎಂದಿದ್ದರು. ಶ್ರೀರಾಮುಲು ಪಕ್ಷ ಬಿಡುವ ಮಾತನಾಡಿದ್ದು, ಕೇಸರಿ ಪಡೆಗೆ ನುಂಗಲಾಗ ಬಿಸಿ ತುಪ್ಪವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ರಾಮುಲರನ್ನು ಸಮಾಧಾನ ಮಾಡಲು ಮುಂದಾಗಿದೆ.
ಇದೀಗ ಶ್ರೀರಾಮುಲು ಇದನ್ನೇ ಮುಂದಿಟ್ಟುಕೊಂಡು ರಾಜ್ಯಸಭೆ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ರಾಮುಲುಗೆ ಸದ್ಯ ಬಿಜೆಪಿಯಲ್ಲಿ ಯಾವುದೇ ಹುದ್ದೆ ಇಲ್ಲದೆ ಖಾಲಿ ಇದ್ದಾರೆ. ಇದೇ ಸಂದರ್ಭದಲ್ಲಿ ಹೈಕಮಾಂಡ್ನಿಂದ ಭೇಟಿಗೆ ಕರೆ ಬಂದಿದ್ದು, ರಾಜ್ಯಸಭೆ ಸ್ಥಾನದ ಬಗ್ಗೆ ವರಿಷ್ಠರ ಭೇಟಿ ವೇಳೆ ಪ್ರಸ್ತಾಪಿಸುವ ಸಾಧ್ಯತೆ ಇದೆ.
ಈಗಾಗಲೇ ಜನಾರ್ದ ರೆಡ್ಡಿ ಹಾಗೂ ಶ್ರೀರಾಮುಲು ಮುನಿಸನ್ನು ತಣ್ಣಗಾಗಿಸಲು ಹೈಕಮಾಂಡ್ನಿಂದ ಇಬ್ಬರಿಗೂ ಬುಲಾವ್ ಬಂದಿದೆ. ದೆಹಲಿ ಚುನಾವಣೆ ಮುಗಿದ ಬಳಿಕ ದೆಹಲಿಗೆ ಬರುವಂತೆ ಶ್ರೀರಾಮುಲುಗೆ ವರಿಷ್ಠರು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರೆಡ್ಡಿ ಜತೆಗಿನ ಮುನಿಸನ್ನೇ ತಮಗೆ ಲಾಭ ಆಗುವ ರೀತಿ ಬಳಕೆ ಮಾಡಿಕೊಳ್ಳಲು ರಾಮುಲು ಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಸಭೆ ಸದಸ್ಯನಾಗಿ ಅಯ್ಕೆ ಮಾಡುವಂತೆ ಶ್ರೀರಾಮುಲು ಹೈಕಮಾಂಡ್ ಭೇಟಿ ವೇಳೆ ಮನವಿ ಮಾಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮತ್ತೊಮ್ಮೆ ಸಕ್ರಿಯರಾಗಿ ಪಕ್ಷ ಕಟ್ಟಲು ತಮ್ಮನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡಬೇಕು ಎಂದು ಅವರು ವರಿಷ್ಠರ ಬಳಿ ಅಹವಾಲು ತೋಡಿಕೊಳ್ಳುವ ನಿರೀಕ್ಷೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






