Gold Smuggling Case: ಚಿನ್ನದ ರಾಣಿಗೆ ಜೈಲೇ ಗತಿ: ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನವಾಗಿರುವ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಂಡಿದೆ. ನಟಿ ರನ್ಯಾರಾವ್ ಮತ್ತು ಎರಡನೇ ಆರೋಪಿ ತರುಣ್ ಕೊಂಡೂರು ರಾಜು ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ರನ್ಯಾ ರಾವ್ ಮತ್ತು ತರುಣ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿರುವ ನಡುವೆ ಆರೋಪಿ ರನ್ಯಾ ವಿರುದ್ಧ ಕೇಂದ್ರೀಯ ಗುಪ್ತಚರ ಬ್ಯೂರೋ (ಸಿಇಐಬಿ) ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯಿದೆ (ಕಾಫಿಫೋಸಾ) ಯಡಿ ಬಂಧನ ಆದೇಶ ಹೊರಡಿಸಿತ್ತು. ಅರ್ಜಿಯ ವಿಚಾರಣೆ ವೇಳೆ ರನ್ಯಾರಾವ್ ಪರ ವಕೀಲರು, ಅರ್ಜಿದಾರರನ್ನು ಬಂಧಿಸುವ ಸಂದರ್ಭದಲ್ಲಿ ಕಸ್ಟಮ್ಸ್ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ. ಬಂಧನವೇ ಅಕ್ರಮವಾಗಿದ್ದು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ರನ್ಯಾ ರಾವ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ಅವರ ಪತಿಗೆ ಲಿಖಿತವಾಗಿ ವಿವರಿಸಲಾಗಿದೆ. ಪ್ರಸ್ತುತ ಚಿನ್ನಕಳ್ಳಸಾಗಣೆ ಸಂಬಂಧ ತನಿಖೆ ನಡೆಸುತ್ತಿದ್ದು, ರನ್ಯಾಗೆ ಪ್ರೋಟೋಕಾಲ್ ಅಧಿಕಾರವನ್ನು ಯಾವ ಆಧಾರದಲ್ಲಿ ಒದಗಿಸಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕಾಗಿದೆ. ಆದ್ದರಿಂದ ಈ ಹಂತದಲ್ಲಿ ಜಾಮೀನು ನೀಡಬಾರದು. ಜೊತೆಗೆ, ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






