India vs England: ಇಂಗ್ಲೆಂಡ್ ಟಿ20 ಸರಣಿಯಿಂದ ಹೊರಬಿದ್ದ ನಿತೀಶ್ ರೆಡ್ಡಿ, ರಿಂಕು ಸಿಂಗ್..! ಯಾಕೆ ಗೊತ್ತಾ..?

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ. 146 ರನ್ಗಳಿಗೆ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡಿದ್ದರೂ ತಿಲಕ್ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ್ದರು. ಅದರಲ್ಲೂ ಕೊನೆಯ ಓವರ್ನಲ್ಲಿ ಭಾರತ ತಂಡಕ್ಕೆ ಗೆಲ್ಲಲು 6 ರನ್ಗಳ ಅವಶ್ಯಕತೆಯಿತ್ತು.
ಈ ಹಂತದಲ್ಲಿ ಎಲ್ಲಾ ಒತ್ತಡಗಳನ್ನು ಮೆಟ್ಟಿ ನಿಂತ ತಿಲಕ್, ಮೊದಲ ಎಸೆತದಲ್ಲಿ 2 ರನ್ ಕಲೆಹಾಕಿ, ಮರು ಎಸೆತದಲ್ಲಿ ಫೋರ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.
ಇನ್ನೂ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿ ನಡುವೆ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಎದುರಾಗಿದೆ. ತಂಡದ ಪ್ರಮುಖ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡು ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಚೆನ್ನೈನಲ್ಲಿ ನಡೆದ ಅಭ್ಯಾಸದ ವೇಳೆ ನಿತೀಶ್ ಕುಮಾರ್ ಪಾರ್ಶ್ವದ ಒತ್ತಡಕ್ಕೆ ಒಳಗಾಗಿದ್ದರು. ಈ ಗಾಯದ ಸಮಸ್ಯೆಯ ಕಾರಣ ನಿತೀಶ್ ಕುಮಾರ್ ರೆಡ್ಡಿ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಬಿಸಿಸಿಐ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಕೊಲ್ಕತ್ತಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿದು ಮಿಂಚಿದ್ದ ರಿಂಕು ಸಿಂಗ್ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಫೀಲ್ಡಿಂಗ್ ವೇಳೆ ರಿಂಕು ಸಿಂಗ್ ಬೆನ್ನಿನ ಸೆಳೆತಕ್ಕೆ ಒಳಗಾಗಿದ್ದು, ಹೀಗಾಗಿ ಅವರು 2ನೇ ಮತ್ತು 3ನೇ ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಅಲ್ಲದೆ ಅವರ ಫಿಟ್ನೆಸ್ ಪರಿಶೀಲಿಸಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






