Mangaluru: ದ್ವೇಷ ಭಾಷಣ ಮಾಡಿದ ಆರೋಪ: RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕೇಸ್

ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಅಬ್ದುಲ್ ರಹಿಮಾನ ಕೊಲೆ ನಡೆದಿದೆ ಎಂಬ ಆರೋಪ ಕೋಮು ಸಾಮರಸ್ಯ ಕದಡುವಂತೆ ಮಾಡಿದೆ.
ಇದರ ನಡುವೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮೇ 12ರಂದು ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ, ಘಟನೆ ನಡೆದ 17 ದಿನಗಳ ಬಳಿಕ ಎಫ್ಐಆರ್ ದಾಖಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆಯು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ನಡೆದಿತ್ತು.
ಶ್ರದ್ಧಾಂಜಲಿ ಸಭೆಯಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು ಭಾಗವಹಿಸಿದ್ದರು. ಅಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ಥ್ಯ ಕೆಡುವಂತೆ ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಅವರು ಹೇಳಿಕೆ ನೀಡಿದ್ದಾರೆ.
ಇದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 353(2) ಬಿಎನ್ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






