Pavithra Gowda: ರೇಣುಕಾಸ್ವಾಮಿ ಕೊಲೆ ಕೇಸ್: 6 ತಿಂಗಳ ಬಳಿಕ ಪವಿತ್ರಾ ಗೌಡ ರಿಲೀಸ್!

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆಗಿರುವ ನಟಿ ಪವಿತ್ರಾ ಗೌಡಗೆ ಡಿಸೆಂಬರ್ 13ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಬೇಲ್ ಸಿಕ್ಕಿ ಮೂರು ದಿನ ಕಳೆದ ಮೇಲೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಹೌದು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್ನ ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.
ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್ ಬಿಡುಗಡೆಯಾಗಿದ್ದಾನೆ. ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.
ಮಗಳಿಗಾಗಿ ಗೇಟ್ನಲ್ಲೇ ಕಾಯ್ತಿದ್ದ ಪವಿತ್ರಾ ತಾಯಿ ಅಲ್ಲೇ ಇದ್ದ ಮುನೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ರು. ಪರಪ್ಪನ ಅಗ್ರಹಾರದ ಬಳಿ ಇರುವ ಮುನೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ಪವಿತ್ರಾ ತಾಯಿ ಮಗಳ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವರಿಗೆ ನಿಂಬೆಹಣ್ಣಿನ ಹಾರ ಹಾಕಿ ಪೂಜೆ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






