Rain Alert: ನಿನ್ನೆ ರಾತ್ರಿ ಸುರಿದ ಮಳೆಗೆ ನಡುಗಿದ ಬೆಂಗಳೂರು..! ಇಂದು ಇಲ್ಲೆಲ್ಲಾ ಸುರಿಯಲಿದೆ ಧಾರಾಕಾರ ಮಳೆ!

ಬೆಂಗಳೂರು: ನಿನ್ನೆ ರಾತ್ರಿ ಸುರಿದ ಮಳೆಗೆ ಜನರು ಹೈರಾಣರಾಗಿದ್ದಾರೆ. ನಾಗವಾರದಲ್ಲಿ ಮನೆಗೆ ನೀರು ನುಗ್ಗಿ ಜನರು ಪರದಾಡಿದರು. ಇನ್ನೂ ಎರಡು ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಗರದಲ್ಲಿ ನಿನ್ನೆ ಸುರಿದ ಮಳೆಗೆ ಜನರು ಬೆಚ್ಚಿ ಬಿದಿದ್ದಾರೆ. ಮಳೆಯಿಂದಾಗಿ ಬೆಂಗಳೂರಿನ ಸಾಯಿಲೇಔಟ್ ಜಲಾವೃತಗೊಂಡಿದ್ದು,
ಇದೇ ವರ್ಷದಲ್ಲಿ 2ನೇ ಬಾರಿ ಸಮಸ್ಯೆ ಎದುರಾಗಿದೆ. ಸಾಯಿಮಂದಿರಕ್ಕೂ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬೆಳಗ್ಗೆಯಾದರೂ ನೀರು ಮಾತ್ರ ಖಾಲಿಯಾಗಿಲ್ಲ. ರಾಜಕಾಲುವೆ ನೀರು ರಸ್ತೆ ತುಂಬಿ ಮನೆಗಳಿಗೂ ನುಗ್ಗಿದೆ. ಹಾಗಾಗಿ ಜನರು ಹೊರಗೆ ಬಾರದೆ ಮನೆಯಲ್ಲಿ ಉಳಿಯುವಂತಾಗಿದೆ.
ಇನ್ನು ಸಾಯಿ ಲೇಔಟ್ನ ಕಾವೇರಿ ನಗರದ ಮನೆಗಳಿಗೂ ಮಳೆ ನೀರು ನುಗ್ಗಿದೆ. ಬಿಬಿಎಂಪಿಯವರು ಈಗ ಬಂದಿದ್ದಾರೆ. ಕೋಟಿ ಕೋಟಿ ಹಣ ಇಟ್ಟಿದ್ದೀವೆ ಅಂತಾರೆ ಇದೇನಾ ಇವರ ಕೆಲಸ. ಈ ರೀತಿ ಹಿಂಸೆ ಕೊಡುವ ಬದಲು ಸಾಯಿಸಿಬಿಡಿ ಅಂತಾ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದೆ. ಚಂಡಮಾರುತದ ಪರಿಣಾಮ ಹಲವು ರಾಜ್ಯಗಳ ಮೇಲಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಒಣಹವೆ ಮುಂದುವರೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






