Tejasvi surya wedding: ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ..!

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ನಡೆದಿದೆ. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.
ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ. ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್ನಲ್ಲಿ ಪದವಿಯನ್ನೂ ಗಳಿಸಿದ್ದಾರೆ.
ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು. ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






