UPSC Result: UPSC ಪರೀಕ್ಷೆ 2024 ಫಲಿತಾಂಶ ಪ್ರಕಟ: ಹಾವೇರಿಯ ವೈದ್ಯನಿಗೆ 41ನೇ ಶ್ರೇಯಾಂಕ!

ಹಾವೇರಿ: ಕೇಂದ್ರ ಲೋಕಸೇವಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟವಾಗಿದೆ. ಒಟ್ಟು 1,009 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, 2018ರಿಂದ ಯುಪಿಎಸ್ಸಿ ತಯಾರಿ ನಡೆಸುತ್ತಿದ್ದ ಪ್ರಯಾಗ್ರಾಜ್ನ ಶಕ್ತಿ ದುಬೆ ಪ್ರಥಮ ರ್ಯಾಂಕ್ನೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಹರ್ಷಿತಾ ಗೋಯಲ್ 2ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.
ಇನ್ನೂ ಕರ್ನಾಟಕ ಹಲವು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯುವ ಮೂಲಕ ತಮ್ಮೂರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದ ನಿವಾಸಿ ಸಚಿನ್ ಗುತ್ತೂರು ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 41ನೇ ರ್ಯಾಂಕ್ ಪಡೆದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸ್ತಿರುವ ಸಚಿನ್ ಬಸವರಾಜ ಗುತ್ತೂರ ಅವರು ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ಇನ್ನು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಪಾಂಡುರಂಗ ಸದಾಶಿವ ಕಂಬಳಿ 529ನೇ ರ್ಯಾಂಕ್ ಪಡೆದಿದ್ದಾರೆ. ಪಾಡುರಂಗ ಅವರು ಕಳೆದ ಒಂದು ವರ್ಷದಿಂದ ಐಎಫ್ಎಸ್ನಲ್ಲಿ ಸೇವೆ ಸಲ್ಲಿಸ್ತಿದ್ದಾರೆ. ಕೆಲಸ ಮಾಡುತ್ತಲೇ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಪಾಡುರಂಗ ಅವರು ಐದನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ. ಪಾಂಡುರಂಗ ಕಂಬಳಿ ಓರ್ವ ರೈತರ ಪುತ್ರರಾಗಿದ್ದಾರೆ. ಪಾಂಡುರಂಗ ಅವರ ಮನೆಯಲ್ಲಿ ಸಂಭ್ರಮಾಚರಣೆ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?






