ಆಂಧ್ರಪ್ರದೇಶದ ಕಾಶಿಬುಗ್ಗದಲ್ಲಿ ಘೋರ ದುರಂತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ದಾರುಣ ಸಾವು
ಆಂಧ್ರಪ್ರದೇಶ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆ, ಕಾಶಿಬುಗ್ಗದ ಶ್ರೀ ವೆಂಕಟಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ, 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಏಕಾದಶಿ ಸಂದರ್ಭದಲ್ಲಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದ ಸಂದರ್ಭದಲ್ಲಿ ನಡೆದಿದೆ.
ಘಟನೆಯಲ್ಲಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇತರ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಭಕ್ತರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳೀಯ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲು ಸ್ಥಳಕ್ಕೆ ಧಾವಿಸಲಾಗಿದೆ.
ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಕಾರ್ತಿಕ ಮಾಸದ ಏಕಾದಶಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ ಎಂದು ಆಂಧ್ರ ಪ್ರದೇಶ ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಕಾರ್ತಿಕ ಮಾಸದ ಏಕಾದಶಿಯ ಕಾರಣ ದೇಗುಲಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದರ್ಶನಕ್ಕಾಗಿ ದೇವಾಲಯದಲ್ಲಿ ಭಕ್ತರು ಜಮಾಯಿಸಿದ್ದರು. ಆರಂಭಿಕ ವರದಿಗಳ ಪ್ರಕಾರ, ದೇವಾಲಯದ ಆವರಣದ ಪ್ರವೇಶದ್ವಾರದ ಬಳಿ ಜನಸಂದಣಿಯ ಒತ್ತಡ ಇದ್ದಕ್ಕಿದ್ದಂತೆ ಹೆಚ್ಚಾಯಿತು. ಇದು ಜನರಲ್ಲಿ ಗೊಂದಲವನ್ನು ಉಂಟುಮಾಡಿತು ಮತ್ತು ಕಾಲ್ತುಳಿತಕ್ಕೆ ಕಾರಣವಾಯಿತು. ಅನೇಕ ಜನರು ಕೆಳಗೆ ಬಿದ್ದು ಕಾಲ್ತುಳಿತಕ್ಕೊಳಗಾದರು.
ಪರಿಸ್ಥಿತಿ ನಿಯಂತ್ರಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ತಂಡಗಳು ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ದೇವಾಲಯಕ್ಕೆ ತಲುಪಿ ಪರಿಸ್ಥಿತಿಯನ್ನು ನಿಭಾಯಿಸಲು ದೇವಾಲಯದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?