ಆಟ ಅರ್ಧಕ್ಕೆ ನಿಲ್ಲಿಸಿ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದೇಕೆ? ಇಲ್ಲಿದೆ ಅಸಲಿ ಕಾರಣ?

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ಭಾರತ ತಂಡದ ಹಂಗಾಮಿ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಜಸ್ಪ್ರೀತ್ ಬುಮ್ರಾ ಅವರು ಆಟ ಅರ್ಧಕ್ಕೆ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ನಡುವೆ ಮೈದಾನ ತೊರೆದಿದ್ದರು. ಸಿಡ್ನಿಯಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ದಿನದಾಟದ ಭೋಜನಾ ವಿರಾಮದ ಬಳಿಕ ಬುಮ್ರಾ ದಿಢೀರ್ ಆಗಿ ಡ್ರೆಸ್ಸಿಂಗ್ ರೂಮ್ಗೆ ಮರಳಿದ್ದರು.
ಇದಾದ ಕೆಲವೇ ಕ್ಷಣಗಳಲ್ಲಿ ಅವರು ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕಾರಿನಲ್ಲಿ ತೆರಳಿದ್ದರು. ಆದರೆ ಹೋಗಿದೆಲ್ಲಿಗೆ ಅಥವಾ ಅವರಿಗೆ ಏನಾಗಿದೆ ಎಂಬುದರ ಮಾಹಿತಿ ಮಾತ್ರ ಹೊರಬಿದ್ದಿರಲಿಲ್ಲ. ಇದೀಗ ಜಸ್ಪ್ರೀತ್ ಬುಮ್ರಾ ಅವರಿಗೆ ಏನಾಗಿತ್ತು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.
ಭೋಜನಾ ವಿರಾಮದ ಬಳಿಕ ಓವರ್ ಎಸೆದ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಅವರ ಬೆನ್ನಿನ ಸ್ನಾಯುವಿನಲ್ಲಿ ಸೆಳೆತ ಉಂಟಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆಯ ಸಲುವಾಗಿ ಅವರು ಮೈದಾನದಿಂದ ಹೊರ ನಡೆದಿದ್ದಾರೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಇನ್ನು ಡ್ರೆಸ್ಸಿಂಗ್ ರೂಮ್ಗೆ ತೆರಳಿದ ಬಳಿಕ ಜಸ್ಪ್ರೀತ್ ಬುಮ್ರಾ ಅವರನ್ನು ಫಿಸಿಯೋ ಪರೀಕ್ಷಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ಗಾಗಿ ಸಿಡ್ನಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ಆಸ್ಪತ್ರೆಯಿಂದ ಜಸ್ಪ್ರೀತ್ ಬುಮ್ರಾ ಮರಳಿದ್ದು, ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ.
ಜಸ್ಪ್ರೀತ್ ಬುಮ್ರಾ ಅವರ ಸ್ಕ್ಯಾನಿಂಗ್ ರಿಪೋರ್ಟ್ ಇನ್ನಷ್ಟೇ ಬರಬೇಕಿದ್ದು, ಹೀಗಾಗಿ ಅವರು ಮೂರನೇ ದಿನದಾಟದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ ಉದ್ಭವಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






