ಕಾಂಗ್ರೆಸ್ ಶಾಸಕ ನಂಜೇಗೌಡಗೆ ಹಿನ್ನಡೆ: ಮಾಲೂರು ಫಲಿತಾಂಶದ ಮರು ಮತ ಎಣಿಕೆಗೆ ಸುಪ್ರೀಂ ಆದೇಶ
ಬೆಂಗಳೂರು: ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರಿಗೆ ಸುಪ್ರೀಂ ಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ದೊರೆತಿದೆ. ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ, 4 ವಾರಗಳಲ್ಲಿ ಮರು ಮತ ಎಣಿಕೆಗೆ ಮಹತ್ವದ ಸೂಚನೆ ನೀಡಿದೆ.
ಹೌದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಮರು ಮತ ಎಣಿಕೆಗೆ ಸೂಚನೆ ನೀಡಿದೆ. ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಇದರೊಂದಿಗೆ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ತುಸು ರಿಲೀಫ್ ದೊರೆತಂತಾಗಿದೆ. ಶಾಸಕ ಕೆವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಸೆಪ್ಟೆಂಬರ್ 16 ರಂದು ತೀರ್ಪು ಪ್ರಕಟಿಸಿದ್ದ ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿತ್ತು. ಅಲ್ಲದೆ, ಮೇಲ್ಮನವಿ ಸಲ್ಲಿಸುವ ವರೆಗೆ ಆದೇಶವನ್ನು ತಟಸ್ಥವಾಗಿ ಇರಿಸುವಂತೆ ನಿರ್ದೇಶನ ನೀಡಿತ್ತು.
ಮರು ಮತ ಎಣಿಕೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ಫಲಿತಾಂಶ ಘೋಷಿಸುವಂತಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?