ಕುಂಭಮೇಳದಲ್ಲಿ ಕಾಲ್ತುಲಿತ ಪ್ರಕರಣ: ಕರ್ನಾಟಕದ ನಾಲ್ವರು ದುರಂತ ಸಾವು!

ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 15 ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಮಹಾ ಕುಂಭಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಪ್ರಯಾಗ್ರಾಜ್ನ ಸಂಗಮ್ ಪ್ರದೇಶದಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ಏಕಾಏಕಿ ಜನರು ನುಗ್ಗಿಕೊಂಡು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 15 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಪ್ರಯಾಗರಾಜ್ನ ಕುಂಭಮೇಳದಲ್ಲಿ ಕಾಲ್ತುಳಿತದ ಪ್ರಕರಣದಲ್ಲಿ ಬೆಳಗಾವಿಯ ಇಬ್ಬರು ತಾಯಿ-ಮಗಳು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.
ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಅರುಣ್ ಕೋಪರ್ಡೆ ಹಾಗೂ ಮಹಾದೇವಿ ಎಂದು ಗುರುತಿಸಲಾಗಿದೆ. ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್ರಾಜ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ.
ತಾಯಿ ಮಗಳು ಸಾವನ್ನಪ್ಪಿದ ಬಳಿಕ ಬೆಳಗಾವಿಯ ಮೂಲದ ಇನ್ನು ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಿವಾಜಿನಗರದ ನಿವಾಸಿ ಮಹಾದೇವಿ ಹನುಮಂತ ಬಾವನೂರ ಹಾಗೂ ಬೆಳಗಾವಿ ನಗರದ ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಸಾವನ್ನಪ್ಪಿದ್ದಾರೆ. ಇನ್ನು ಅರುಣ್ ಹೆಂಡತಿ ಕಾಂಚನಾಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಭಾನುವಾರ 30 ಜನರ ಜೊತೆ ಮಹಾ ಕುಂಭಮೇಳಕ್ಕೆ ತೆರಳಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






