ಘೋರ ದುರಂತ: ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವು!
ವಿಜಯಪುರ: ಆಟವಾಡುತ್ತಿದ್ದ ವೇಳೆ ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕು ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಮೃತರನ್ನು ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಮತ್ತು ಸ್ವಪ್ನಾ ರಾಜು ರಾಠೋಡ್ (12) ಎಂದು ಗುರುತಿಸಲಾಗಿದೆ.
ಮೃತ ಮಕ್ಕಳು ಮಹದೇವ ನಗರದ ಬಳಿ ಇರುವ ತಮ್ಮ ಜಮೀನಿನಲ್ಲಿ ಕುರಿಗಳ ಜೊತೆಗೆ ಆಟವಾಡುತ್ತಿದ್ದು, ಆಟವಾಡುತ್ತಲೇ ಹತ್ತಿರದ ಕೃಷಿ ಹೊಂಡದ ಬಳಿ ತೆರಳಿದ್ದಾರೆ. ಈ ವೇಳೆ ಆಯತಪ್ಪಿ ಹೊಂಡದಲ್ಲಿ ಬಿದ್ದು, ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಬಹಳ ಹೊತ್ತಾದರೂ ಮಕ್ಕಳು ಬಾರದಿರುವ ಹಿನ್ನಲೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಸಂಶಯ ಬಂದು ಕೃಷಿ ಹೊಂಡದಲ್ಲಿ ಹುಡುಕಾಡಿದಾಗ ಮೂವರು ಮಕ್ಕಳ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಚೆನಗೊಂಡ ಹಾಗೂ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಕಾನೂನಿನ ಪ್ರಕಾರ ಕೃಷಿಹೊಂಡದ ಸುತ್ತಲೂ ತಂತಿ ಬೇಲಿಯನ್ನ ಕಡ್ಡಾಯವಾಗಿ ಹಾಕಬೇಕು. ಕೃಷಿ ಹೊಂಡದ ಬಳಿ ಯಾರೂ ಓಡಾಡದಂತೆ ನೋಡಿಕೊಳ್ಳಬೇಕು ಎಂಬ ನಿಯಮವಿದೆ. ಆದರೆ ಇದ್ಯಾವುದೇ ನಿಯಮಗಳನ್ನು ಕೆಲ ರೈತರು ಪಾಲನೆ ಮಾಡದಿರುವುದೇ ಇಂತಹ ದುರಂತಗಳಿಗೆ ಕಾರಣವಾಗುತ್ತಿವೆ.
ನಿಮ್ಮ ಪ್ರತಿಕ್ರಿಯೆ ಏನು?