ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು: ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲು ಸಿದ್ಧ ಎಂದ ಆರೋಗ್ಯ ಸಚಿವ

ಡಿಸೆಂಬರ್ 6, 2024 - 13:57
 0  10
ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು: ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲು ಸಿದ್ಧ ಎಂದ ಆರೋಗ್ಯ ಸಚಿವ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಒಂಬತ್ತೂ ಬಾಣಂತಿಯರಿಗೆ IV ದ್ರಾವಣ ನೀಡಲಾಗಿತ್ತು. IV ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು ಎಂಬ ಸ್ಫೋಟಕ ಅಂಶ ಬಯಲಾಗಿದೆ. ಇನ್ನೂ ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ,  ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ. ಇದು ಜೀವಕ್ಕೆ ಸಂಬಂಧಿಸಿದ ವಿಚಾರ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಎಂಬುದೇ ಆದರೆ ಅದಕ್ಕೂ ಸಿದ್ಧ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ ಎಂದರು.

ಬಳ್ಳಾರಿಯಲ್ಲಿ 9 ಜನರಿಗೆ ಸಮಸ್ಯೆ ಆಗಿತ್ತು. ನಾಲ್ವರು ತೀರಿಕೊಂಡಿದ್ದಾರೆ. ಐದನೇಯವರು ಚಿಕಿತ್ಸೆ ಪಡೆಯುತ್ತಿದ್ದರು. ಅವರೂ ತೀರಿಕೊಂಡಿದ್ದಾರೆ. ಅದೇ ಬ್ಯಾಚ್​ನ ರಿಂಗರ್ ಲ್ಯಾಕ್ಟೇಟ್ ದ್ರಾವಣ‌ ಕೊಡಲಾಗಿತ್ತು. ಈಗಾಗಲೇ ಕಂಪೆನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಆದರೆ, ಚೇತರಿಸಿಕೊಳ್ಳುತ್ತಿದ್ದರು ಎಂದು ವೈದ್ಯರು ಹೇಳಿದ್ದರು. ಆದರೆ ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದು ಸಚಿವರು ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow