ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದು: ಸರ್ಕಾರದ ಮಹತ್ವದ ತೀರ್ಮಾನ

ನವೆಂಬರ್ 2, 2024 - 17:56
 0  19
ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದು: ಸರ್ಕಾರದ ಮಹತ್ವದ ತೀರ್ಮಾನ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು,  ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು.

ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು,  ವಕ್ಫ್‌  ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. 

ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿಯವರು ವಿನಂತಿ ಮಾಡಿದರು. ಜೊತೆಗೆ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು.

ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.

 ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು :

೧.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.

೨.ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌

೩.ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶ಼ಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow