ಪೌರಕಾರ್ಮಿಕರ ಬಹುದಿನಗಳ ಬೇಡಿಕೆಗೆ ಸರ್ಕಾರ ಅಸ್ತು.. ಸೇವೆ ಖಾಯಂ ಎಂದ ಸಿದ್ದರಾಮಯ್ಯ!

ಬೆಂಗಳೂರು:- ಪೌರಕಾರ್ಮಿಕರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದ್ದು, ಸೇವೆ ಖಾಯಂ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.
ವಾಹನ ಚಾಲಕರಿಗೂ ಕಾಯಂ-:
ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






