ಪ್ರತ್ಯೇಕ ಅಪಘಾತದಲ್ಲಿ 14 ಜನ ಸಾವು ಪ್ರಕರಣ: ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟ 14 ಜನರ ಕುಟುಂಬಗಳಿಗೆ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡಿರುವ ಅವರು, ಯಲ್ಲಾಪುರ ಹಾಗೂ ಸಿಂಧನೂರು ಬಳಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಕೊಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಹಣ್ಣು, ತರಕಾರಿ ತುಂಬಿಕೊಂಡು ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ಸಾವನ್ನಪ್ಪಿರುವ ಘಟನೆ ಯಲ್ಲಾಪುರದ ಅರಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ಮುಂಜಾನೆ ಸಂಭವಿಸಿತ್ತು. ಮೃತರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರು. ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವ್ಯಾಪಾರಸ್ಥರು ತರಕಾರಿಗಳನ್ನು ತುಂಬಿಕೊಂಡು ತೆರಳುತ್ತಿದ್ದರು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.
ಇನ್ನೊಂದೆಡೆ, ಆಂಧ್ರ ಪ್ರದೇಶದ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕ ಸಾವನ್ನಪ್ಪಿರುವ ಘಟನೆ ಸಿಂಧನೂರು ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. 14 ಜನ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನದ ಆಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






