ಭಾರತ-ಪಾಕ್ ನಡುವೆ ಯುದ್ಧದ ಕಾರ್ಮೋಡ: ಪೊಲೀಸರಿಗೆ ರಜೆ ಘೋಷಣೆ ಮಾಡಲ್ಲ - ಡಾ.ಜಿ ಪರಮೇಶ್ವರ್

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಇರುವುದರಿಂದ ಪೊಲೀಸರಿಗೆ ರಜೆ ಘೋಷಣೆ ಮಾಡಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪೊಲೀಸರಿಗೆ ರಜೆ ಕೊಡುವುದಿಲ್ಲ.
ಸೂಕ್ಷ್ಮ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ನಮಗೆ ತಿಳಿಸುತ್ತದೆ. ಅಲ್ಲಿಯವರೆಗೂ ನಾವು ಸೂಕ್ಷ್ಮವಾಗಿರಬೇಕು ಎಂದರು.
ಕರಾವಳಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗುತ್ತದೆ. ಕರಾವಳಿಯಲ್ಲಿ ಬಿಗಿ ಭದ್ರತೆ ವಹಿಸಿದ್ದೇವೆ. ಮಂಗಳೂರು, ಉತ್ತರ ಕನ್ನಡದಲ್ಲಿ ನಿಗಾ ವಹಿಸಲಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ವಹಿಸಿದೆ. ನೇವಿ ಅವರು ಕೂಡ ಭದ್ರತೆ ವಹಿಸಿದ್ದಾರೆ. ನಮ್ಮ ಬಾರ್ಡರ್ ಒಳಗೆ ಸೆಕ್ಯೂರಿಟಿ ಇದೆ. ಆ ಮಾಹಿತಿ ನಮಗೆ ಬಂದಿಲ್ಲ. ಕೇಂದ್ರದವರು ಏನಾದರೂ ಇದ್ದರೆ ಹೇಳುತ್ತಾರೆ ಎಂದರು.
ಸನ್ನಿವೇಶ ಎದುರಾಗುವ ಮುನ್ನ ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ಆಹಾರ ಧಾನ್ಯ, ನೀರು, ಆಸ್ಪತ್ರೆಗಳನ್ನು ಸಜ್ಜು ಮಾಡಿಕೊಂಡಿದ್ದೇವೆ. ಅಂತಹ ಘಟನೆಗಳು ನಡೆದರೆ ಎದುರಿಸಲು ನಾವು ಸಿದ್ಧವಾಗಿರಬೇಕು ಎಂಬುದನ್ನು ಹೊರತುಪಡಿಸಿದರೆ, ಅಂತಹ ಸನ್ನಿವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






