ಮೈಕ್ರೊಫೈನಾನ್ಸ್ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮೈಕ್ರೊಫೈನಾನ್ಸ್ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಾಲ ವಸೂಲಿ ಹೆಸರಲ್ಲಿ ಬಡವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ಸುಗ್ರೀವಾಜ್ಞೆ ಬಗ್ಗೆ ಕೇಳಿದಾಗ, "ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಯಂತ್ರಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು" ಎಂದು ತಿಳಿಸಿದರು.
ಎಚ್ಚರಿಕೆ ನೀಡಿದ್ದರೂ ಕಿರುಕುಳ ಮುಂದುವರಿದಿದೆ ಎಂದು ಕೇಳಿದಾಗ, "ಈಗಾಗಲೇ ಬೆಳಗಾವಿ, ಬೀದರ್, ಮೈಸೂರು, ರಾಮನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳಲ್ಲಿ ಎಫ್ ಐಆರ್ ದಾಖಲಾಗಿವೆ. ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರು ಸೂಚಿಸಿದ್ದಾರೆ. ಇದನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ಸಿದ್ಧಪಡಿಸಲಾಗಿದ್ದು, ಒಂದೆರಡು ದಿನಗಳಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗುವುದು.
ಪ್ರತಿ ಜಿಲ್ಲಾ ಕಚೇರಿಯಲ್ಲಿ ಇಂತಹ ಕಿರುಕುಳ ಪ್ರಕರಣಗಳಿಗೆ ದೂರು ನೀಡಲು ಸಹಾಯವಾಣಿ ಆರಂಭಿಸಲಾಗಿದೆ. ಇಂತಹ ಪ್ರಕರಣಗಳು ನಿಮ್ಮ ಗಮನಕ್ಕೆ ಬಂದರೆ ಕೂಡಲೇ ಈ ಸಹಾಯವಾಣಿಗೆ ಸಂಪರ್ಕಿಸಿ, ಬಡವರಿಗೆ ನೆರವಾಗಬೇಕು ಎಂದು ಕಾಂಗ್ರೆಸ್ ಪಕ್ಷ ಹಾಗೂ ಇತರ ಪಕ್ಷಗಳ ಕಾರ್ಯಕರ್ತರಿಗೂ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ತಮ್ಮ ವಿಶ್ರಾಂತಿ ಬಳಿಕ ಸಧ್ಯದಲ್ಲೇ ಪೊಲೀಸ್ ಅಧಿಕಾರಿಗಳು, ಆಯುಕ್ತರ ಜತೆ ಸಭೆ ನಡೆಸಲಿದ್ದಾರೆ. ನಂತರ ಜಿಲ್ಲಾಧಿಕಾರಿಗಳ ಜತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ" ಎಂದು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






