ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು: ಬೆಂಬಲ ಸೂಚಿಸಿದ ಬಿಜೆಪಿ ಮುಖಂಡ ಪ್ರತಾಪ್ ಸಿಂಹ!

ಮೈಸೂರು:- ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡಲು ಪ್ರಸ್ತಾಪ ಇದ್ದು, ಇದಕ್ಕೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಅವರು ಬೆಂಬಲ ಸೂಚಿಸಿದ್ದಾರೆ.
ಮೈಸೂರಿನ ಹೃದಯಭಾಗದಲ್ಲಿರುವ ಒಂಟಿಕೊಪ್ಪಲ್ ಲಕ್ಷೀ ವೆಂಕಟೇಶ್ವರ ದೇವಸ್ಥಾನದಿಂದ ರಾಯಲ್ ಇನ್ ಹೋಟೆಲ್ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಲು ಪಾಲಿಕೆ ಮುಂದಾಗಿದೆ. ಪಾಲಿಕೆಯ ನಿರ್ಧಾರಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿದ್ದಾರೆ
ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಎರಡು ಬಾರಿ ಸಿಎಂ ಆಗಿದ್ದಾರೆ. ಮೈಸೂರಿಗೆ ಶಾಶ್ವತ ಕೊಡುಗೆ ನೀಡಿದ್ದಾರೆ. ಅವರ ಹೆಸರಿಡುವುದು ತಪ್ಪಲ್ಲ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೀಮಿತ ಮಾಡಬಾರದು. ಇದಕ್ಕೆ ವಿರೋಧ ಮಾಡುವುದು ಮೊಸರಲ್ಲಿ ಕಲ್ಲು ಹುಡುಕಿದಂತೆ ಎಂದಿದ್ದಾರೆ.
ಸಿದ್ದರಾಮಯ್ಯ ಹೆಸರಿಡುವ ಪ್ರಸ್ತಾವನೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನವರು ಯಾರೂ ವಿರೋಧ ಮಾಡಬಾರದು. ಕವಿಗಳು, ಸಾಧಕರ ಹೆಸರು ಇಡುವುದು ವಾಡಿಕೆ. ಮೈಸೂರಿಗೆ ಆಶ್ರಯಧಾತರಾಗಿ ಬಂದವರು ಚಾಮರಾಜ ಒಡೆಯರ್, ಕೃಷ್ಣರಾಜ ಒಡೆಯರ್ ಅವರ ಹೆಸರು ಇಟ್ಟಿದ್ದರು. ದಿವಾನರ ಹೆಸರುಗಳನ್ನು ಇಟ್ಟಿದ್ದಾರೆ. ನಾನು ಸೈದ್ಧಾಂತಿಕವಾಗಿ ಇವತ್ತು ಸಿದ್ದರಾಮಯ್ಯ ಅವರನ್ನು ವಿರೋಧಿಸುತ್ತೇನೆ. ಆದರೆ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಇದೆ. ಜಯದೇವ ಅಸ್ಪತ್ರೆ ಕಟ್ಟಲು ಮಾಜಿ ಶಾಸಕ ವಾಸಣ್ಣ ಹಾಗೂ ಸಿದ್ದರಾಮಯ್ಯ ನವರ ಕೊಡುಗೆ ದೊಡ್ಡದು. ನಲ್ವತ್ತು ವರ್ಷದಿಂದ ರಾಜಕಾರಣದಲ್ಲಿ ಇದ್ದಾರೆ. ಸಾಧಕರನ್ನು ಗುರುತಿಸುವ ವಿಚಾರದಲ್ಲಿ ಪಕ್ಷ ಭೇದ ಬೇಡ. ಸಾಧನೆಗೆ ಪಕ್ಷ ತರಬೇಡಿ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






