ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ! ಕಾಂಗ್ರೆಸ್ ಸರ್ಕಾರದ 2ನೇ ವಿಕೆಟ್ ಪತನ
ಬೆಂಗಳೂರು: ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜಣ್ಣ, ಪ್ರಸ್ತುತ ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
ವಿಧಾನಸೌಧದಲ್ಲಿರುವ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ ರಾಜಣ್ಣ ಅವರ ನಿರ್ಧಾರವನ್ನು ಸಿಎಂ ಅಧಿಕೃತವಾಗಿ ಅಂಗೀಕರಿಸಿದ್ದಾರೆ. ನಂತರ, ಸಿಎಂ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಅಂಗೀಕಾರಕ್ಕಾಗಿ ರವಾನಿಸಲಿದ್ದಾರೆ.
ಕರ್ನಾಟಕದಲ್ಲಿ ಮತದಾರರ ಪಟ್ಟಿಯಲ್ಲಿ ಲೋಪದೋಷವಾಗಿರುವ ಬಗ್ಗೆ ಕೆ.ಎನ್.ರಾಜಣ್ಣ ಮಾತನಾಡಿದ್ದರು. 2024ರ ಲೋಕಸಭಾ ಚುನಾವಣೆ ನಡೆದಾಗ, ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವೇ ಇತ್ತು. ನಾವೇ ಮತದಾರರ ಪಟ್ಟಿಯ ಬಗ್ಗೆ ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ನಮ್ಮ ತಪ್ಪು ಕೂಡ ಇದೆ. ವೋಟಿಂಗ್ ಲಿಸ್ಟ್ ತಯಾರಾಗಿದ್ದೇ ನಮ್ಮ ಸರ್ಕಾರದ ಅವಧಿಯಲ್ಲಿ. ಮತದಾರರ ಪಟ್ಟಿಯಲ್ಲಿ ಆಕ್ರಮ ನಡೆದಿರೋದು ನಿಜ.
ಅದರಲ್ಲಿ ಯಾವುದೇ ಅನುಮಾನ ಇಲ್ಲ. ಮಹದೇವಪುರ ಅಸೆಂಬ್ಲಿಯಲ್ಲಿ ನಮ್ಮ ಲೋಪ ಕೂಡ ಇದೆ. ಲೋಕಸಭೆ ಚುನಾವಣೆ ವೇಳೆ ನಾವೇ ಅಧಿಕಾರದಲ್ಲಿದ್ದೇವು ಎಂದು ಸಹಕಾರ ಸಚಿವ ಕೆ. ಎನ್.ರಾಜಣ್ಣ ಮಾತನಾಡಿದ್ದರು. ಕೆ.ಎನ್. ರಾಜಣ್ಣ ಅವರ ಈ ಹೇಳಿಕೆಯ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾಗೆ ದೂರು ನೀಡಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?