ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ 2024 ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಅಂತೆಯೇ ಇಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪರ್ದೀವಾಲ, ನ್ಯಾಯಮೂರ್ತಿ ಮಹದೇವನ್ ಪೀಠ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ ಆಗಿದೆ.
ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಿತು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು. ಮುಂದಿನ ವಿಚಾರಣೆ ಏಪ್ರಿಲ್ 22ಕ್ಕೆ ನಡೆಯಲಿದ್ದು, ಸುಪ್ರೀಂಕೋರ್ಟ್ನಲ್ಲಿಯೂ ದರ್ಶನ್ ಪರವಾಗಿ ವಕೀಲ ನಾಗೇಶ್ ವಕಾಲತ್ತು ವಹಿಸುವ ಸಾಧ್ಯತೆ ಇದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್ ಅವರ ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಹೈಕೋರ್ಟ್, ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡಿದ ಬಳಿಕ ರಾಜ್ಯ ಪೊಲೀಸ್ ಇಲಾಖೆ ಗೃಹ ಇಲಾಖೆಯ ಅನುಮತಿ ಪಡೆದುಕೊಂಡು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಜಾಮೀನು ರದ್ದು ಮಾಡುವಂತೆ ಕೋರಿದೆ.
ನಿಮ್ಮ ಪ್ರತಿಕ್ರಿಯೆ ಏನು?






