ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿಟಿ ರವಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಪರಿಷತ್ ಕಲಾಪದ ವೇಳೆಯೇ ಸಿ.ಟಿ. ರವಿ ತಮಗೆ ಅಸಭ್ಯ ಪದಗಳಿಂದ ನಿಂದಿಸಿದ್ದಾರೆ ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲೇ ರೌದ್ರಾವತಾರ ತಾಳಿದ್ದರು. ಇದಾದ ಬಳಿಕ ಪೊಲೀಸರಿಗೆ ದೂರು ಕೊಡುತ್ತಿದ್ದಂತೆ, ಸಿಟಿ ರವಿಯನ್ನು ಅರೆಸ್ಟ್ ಮಾಡಲಾಯ್ತು. ಮುಂದೆ ನಡೆದ ಹೈಡ್ರಾಮಾಗಳೆಲ್ಲ ಎಲ್ಲರಿಗೂ ಗೊತ್ತೇ ಇದೆ.
ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.
ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.
ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.
ನಿಮ್ಮ ಪ್ರತಿಕ್ರಿಯೆ ಏನು?






