ವಿದ್ಯಾವಾಚಸ್ಪತಿ, ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ನಿಧನ..!

ಧಾರವಾಡ: ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ (92) ಅವರು, ಧಾರವಾಡ ಜಯನಗರ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ ಹಿರೇಮಠ ಅವರು ಮೂಲತಃ ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದವರು. ಧಾರವಾಡದಲ್ಲಿ ವಾಸವಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಿಧನರಾಗಿದ್ದಾರೆ. ಇಂದು ಸಂಜೆ ಬಿಸರಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಕಾವ್ಯ, ಗದ್ಯ, ಪತ್ರ ಸಾಹಿತ್ಯ, ಸಣ್ಣಕಥೆ, ಸಂಶೋಧನೆ, ಸಂಪಾದನೆ ಮುಂತಾದ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಸಿದ್ಧಿ ಸಾಧಿಸಿದ್ದ ಇವರು ಬಹುಭಾಷಾ ಕೋವಿದರು. ಹಲವು ಭಾಷೆಗಳಿಂದ ಅನೇಕ ಸಾಹಿತ್ಯ ಕೃತಿ ರತ್ನಗಳನ್ನು ಕನ್ನಡಕ್ಕೆ ಅನುವಾದಿಸಿ, ಜೊತೆಗೆ ಅವುಗಳ ಬಗೆಗೆ ಕನ್ನಡದಲ್ಲಿ ಸ್ವತಂತ್ರವಾಗಿ ಬರೆದು ಭಾಷಾಬಾಂಧವ್ಯಕ್ಕೆ ನಾಂದಿ ಹಾಡಿದ್ದರು.
19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು,
7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ ನಾಟಕಗಳು, ಸಂಪಾದನೆಯ 8 ಕೃತಿಗಳು, ಹಿಂದಿ, ತೆಲಗು ಹಾಗೂ ಆಂಗ್ಲಭಾಷೆಗೆ ಭಾಷಾಂತರಗೊಂಡ 8 ಕೃತಿಗಳು ಸೇರಿ ಸುಮಾರು ನೂರಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಕನ್ನಡ ಸಾರಸ್ವತಲೋಕಕ್ಕೆ ಸಮರ್ಪಿಸಿ ಧನ್ಯತೆಯನ್ನು ಕಂಡ ಡಾ.ಪಂಚಾಕ್ಷರಿ ಹಿರೇಮಠ ಅವರು ಅಪ್ಪಟ ಭಾವಜೀವಿ ಮತ್ತು ಕನಸುಗಾರರಾಗಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






