ವಿಧಾನಸಭೆಯಲ್ಲೂ ಅಮಿತ್ ಶಾ ಹೇಳಿಕೆ ಗದ್ದಲ: ಅಂಬೇಡ್ಕರ್ ಭಾವಚಿತ್ರ ಪ್ರದರ್ಶನ ಮಾಡಿದ ಕಾಂಗ್ರೆಸ್

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.
ಸ್ಪೀಕರ್ ಯು.ಟ.ಖಾದರ್ ಅವರು ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದ ನಂತರವೂ ಸದನದಲ್ಲೇ ಪ್ರತಿಭಟನೆ ಮುಂದುವರೆದಿತ್ತು. ಕಾಂಗ್ರೆಸ್ನ ಎಲ್ಲಾ ಶಾಸಕರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ತಮ್ಮ ಸ್ಥಾನದಿಂದಲೇ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.
ಸದನದ ಒಳಗೆ ಯಾವುದೇ ಭಿತ್ತಿಪತ್ತ ಹಾಗೂ ಭಾವಚಿತ್ರಗಳನ್ನು ಪ್ರದರ್ಶನ ಮಾಡುವಂತಿಲ್ಲ ಎಂದು ಸ್ಪೀಕರ್ ಖಾದರ್ ತಿಳಿ ಹೇಳಿದರೂ, ಇದಕ್ಕೆ ಕಿವಿಗೊಡದ ಕಾಂಗ್ರೆಸ್ ಶಾಸಕರು ಪ್ರತಿಭಟನೆ ಮುಂದುವರೆಸಿದರು. ಈ ಸಂದರ್ಭದಲ್ಲಿ ಗೊಂದಲದ ವಾತಾವರಣ ಮುಂದುವರೆದಾಗ ಸ್ಪೀಕರ್ ಅವರು ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದರು.
ಆ ನಂತರವೂ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ಮುಂದುವರೆಸಿದರು. ಜೈ ಭೀಮ್ ಘೋಷಣೆಗಳನ್ನು ಕೂಗಿದರು. ಸದನದಲ್ಲಿ ಕುಳಿತಿದ್ದು ಮುಖ್ಯಮಂತ್ರಿಯವರು ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ತಮ್ಮ ಶಾಸಕರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






