ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ: ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ - ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಮೀಕ್ಷಾ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಲು ಶಾಲೆಗಳ ಶಿಕ್ಷಕರನ್ನು ಸಂಪೂರ್ಣವಾಗಿ ಬಳಸಲು ನಿರ್ಧಾರವಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘ ಸಹ ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿತ್ತು. ಅರ್ಧ ದಿನ ಸಮೀಕ್ಷೆ, ಅರ್ಧ ದಿನ ಪಾಠ ಭೋಧನೆ ನಡೆಸುವ ವ್ಯವಸ್ಥೆ ನಿಷ್ಪಕ್ಷಪಾತವಲ್ಲದ ಕಾರಣ, ಸಂಪೂರ್ಣವಾಗಿ ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಲಾಗಿದೆ.ಈ ಕ್ರಮದಿಂದ ರಾಜ್ಯದ ಸಮೀಕ್ಷೆ ಕಾರ್ಯದ ಸಮಗ್ರತೆ ಸಾಧಿಸುವುದು ಉದ್ದೇಶವಾಗಿದೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಆರಂಭಗೊಂಡಿತ್ತು. ಇದನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಸಮೀಕ್ಷೆಯ ಪ್ರಗತಿ ನಿರೀಕ್ಷಿಸಿದಷ್ಟು ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದಾದ್ಯಂತ ನಮ್ಮ ನಿರೀಕ್ಷೆಗೆ ತಕ್ಕಂತೆ ಸರ್ವೇ ಪೂರ್ಣಗೊಂಡಿಲ್ಲ.
ಕೊಪ್ಪಳದಂತಹ ಕೆಲವು ಜಿಲ್ಲೆಗಳಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ. 60ರಷ್ಟು ಮಾತ್ರ ಆಗಿದೆ. ಅಕ್ಟೋಬರ್ 7 ಕೊನೆಯ ದಿನವಾಗಿದ್ದರೂ, ಎಲ್ಲ ಜಿಲ್ಲೆಗಳಲ್ಲಿ ಸಂಪೂರ್ಣ ಸರ್ವೇ ಪೂರ್ಣವಾಗುವುದು ಅಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಮೀಕ್ಷಾ ಕಾರ್ಯದಲ್ಲಿ ರಾಜ್ಯದಾದ್ಯಂತ ಸುಮಾರು 1.20 ಲಕ್ಷ ಶಿಕ್ಷಕರು ಹಾಗೂ 40 ಸಾವಿರ ಇತರ ಸಿಬ್ಬಂದಿ ಸೇರಿ ಒಟ್ಟು 1.60 ಲಕ್ಷ ಜನರು ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿಕ್ಷಕರ ಸಂಘಟನೆಗಳು ಸಮೀಕ್ಷೆ ಪೂರ್ಣಗೊಳಿಸಲು ಕನಿಷ್ಠ 10 ದಿನಗಳ ಹೆಚ್ಚುವರಿ ಕಾಲಾವಕಾಶ ಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು.
ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರವು, ಶಾಶ್ವತ ಹಿಂದುಳಿದ ಆಯೋಗದ ಜೊತೆ ಚರ್ಚಿಸಿ ಶಿಕ್ಷಣ ಇಲಾಖೆಯ ಮೂಲಕ ರಜೆ ವಿಸ್ತರಿಸಿ ಆದೇಶ ನೀಡಿದೆ. ನಾಳೆಯಿಂದ (ಅ.08) ಆರಂಭಗೊಂಡು ಅಕ್ಟೋಬರ್ 18 ರವರೆಗೆ (ಸುಮಾರು 6 ವರ್ಕಿಂಗ್ ಡೇಸ್) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ರಜೆ ಮುಂದುವರೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?