ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಮುಖಭಂಗ! ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಕೋರ್ಟ್

ಬೆಂಗಳೂರು: ವಿಪಕ್ಷಗಳ ವಿರೋಧ ನಡುವೆಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆದುಕೊಂಡು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಕೇಸ್ ವಾಪಸ್ ಆದೇಶವನ್ನು ರದ್ದುಪಡಿಸಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. ಈ ಹಿಂದೆ ಅರ್ಜಿ ವಿಚಾರಣೆ ವೇಳೆ, "ಇದೊಂದು ಗಂಭೀರ ವಿಚಾರ" ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.
ಅಲ್ಲದೆ, ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳು ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 321ಕ್ಕೆ ವಿರುದ್ಧವಾಗಿ ಸರ್ಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ. ಅಭಿಯೋಜನಾ ಇಲಾಖೆ ಪ್ರಕರಣಗಳು ವಾಪಸ್ ಪಡೆಯಲು ಅರ್ಹವಲ್ಲವೆಂದು ಹೇಳಿದ್ದರೂ ಸಹ ಸರ್ಕಾರ ತನ್ನ ವ್ಯಾಪ್ತಿ ಮೀರಿ ಕ್ರಮ ಕೈಗೊಂಡಿದೆ. ಹಾಗಾಗಿ, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಕೋರ್ಟ್ಗಳು ಒಪ್ಪುವುದಿಲ್ಲ. ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಪೀಠ ಮೌಖಿಕವಾಗಿ ತಿಳಿಸಿತ್ತು.
ಜೊತೆಗೆ, ಅರ್ಜಿದಾರರು ಎಲ್ಲೆಲ್ಲಿ ಕೋರ್ಟ್ ಕೇಸ್ಗಳು ಬಾಕಿ ಇವೆಯೋ ಅಂತಹ ಕಡೆ ಪಿಐಎಲ್ ಬಾಕಿ ಇರುವುದನ್ನು ಗಮನಕ್ಕೆ ತಂದರೆ ಯಾವ ನ್ಯಾಯಾಲಯವೂ ಪ್ರಕರಣ ಹಿಂಪಡೆಯಲು ಒಪ್ಪುವುದಿಲ್ಲ. ಒಂದು ವೇಳೆ ನ್ಯಾಯಾಲಯ ಅನುಮತಿ ನೀಡಿದರೆ ಅದು ಕೋರ್ಟ್ನ ಅಪಾಯಕ್ಕೂ ಕಾರಣವಾಗಲಿದೆ ಎಂದು ಪೀಠ ಹೇಳಿತ್ತು.
ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ''ಪ್ರಕರಣಗಳ ವಾಪಸಾತಿಯಲ್ಲಿ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ. ಆ ವಿಚಾರದಲ್ಲಿ ಸಾರ್ವಜನಿಕ ಅಭಿಯೋಜಕರು ನಿರ್ಧರಿಸಬೇಕು. ಆದರೆ, ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಸಿಆರ್ಪಿಸಿ ಸೆಕ್ಷನ್ 321 ಅನ್ವಯ ಪ್ರಕರಣಗಳನ್ನು ವಾಪಸ್ ಪಡೆಯಲು ಅವಕಾಶವಿಲ್ಲವೆಂದು ಹೇಳಿದ್ದರೂ, ಸರ್ಕಾರ ಇಂತಹ ನಿಯಮಬಾಹಿರ ತೀರ್ಮಾನ ಕೈಗೊಂಡಿದೆ'' ಎಂದು ಪೀಠಕ್ಕೆ ವಿವರಿಸಿದ್ದರು.
''ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳನ್ನು ಅನುಸರಿಸದೆ, 43 ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಪಬ್ಲಿಕ್ ಪ್ರಾಸಿಕ್ಯೂಟರ್ಗಳಿಗೆ ನಿರ್ದೇಶನ ನೀಡಿದೆ. ಇದು ಅತ್ಯಂತ ಗಂಭೀರ ಮತ್ತು ಮಹತ್ವದ ವಿಚಾರವಾಗಿದೆ. ಅಭಿಯೋಜನಾ ಇಲಾಖೆ ಪ್ರಕರಣಗಳನ್ನು ವಾಪಸ್ ಪಡೆಯಲಾಗದು ಎಂದು ಅಭಿಪ್ರಾಯ ನೀಡಿದ್ದರೂ ಸಹ ಸರ್ಕಾರ ಆದೇಶ ಹೊರಡಿಸಿದೆ. ವಾಪಸ್ ಪಡೆಯುತ್ತಿರುವ ಪ್ರಕರಣಗಳಲ್ಲಿ ಹುಬ್ಬಳ್ಳಿ ಗಲಭೆ, ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ ಮತ್ತಿತರವುಗಳಿವೆ. ಆ ಕೇಸ್ಗಳು ಗಂಭೀರವಾಗಿರುವ ಕಾರಣ ಅಭಿಯೋಜನಾ ಇಲಾಖೆಯು ವಾಪಸ್ ಪಡೆಯುವ ಪ್ರಸ್ತಾವನೆಯನ್ನು ತಿರಸ್ಕರಿಸಿದೆ'' ಎಂದು ಪೀಠಕ್ಕೆ ತಿಳಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






