ಸ್ವಾಮೀಜಿಯಾಗಿ ಗಂಭೀರವಾಗಿರಬೇಕು, ನೀವು ಒಳ್ಳೆಯ ಪ್ರಜೆಯಲ್ಲ: ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

ಅಕ್ಟೋಬರ್ 29, 2025 - 22:40
 0  11
ಸ್ವಾಮೀಜಿಯಾಗಿ ಗಂಭೀರವಾಗಿರಬೇಕು, ನೀವು ಒಳ್ಳೆಯ ಪ್ರಜೆಯಲ್ಲ: ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

ನವದೆಹಲಿ: ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮಿಜಿಗಳ ಅವಹೇಳನ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಅಸಂವಿಧಾನಿಕ ಆಶ್ಲೀಲ ಭಾಷೆ ಬಳಸಿದ ಆರೋಪದ ಹಿನ್ನಲೆ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧಿಲಾಗಿತ್ತು. ಇದೀಗ ಈ ಸಂಬಂಧ ಜಿಲ್ಲಾ ಪ್ರವೇಶ ನಿರ್ಬಂಧ ಪ್ರಶ್ನಿಸಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಪೀಠ ವಿಚಾರಣೆ ನಡೆಸಿತು. ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ, ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ನೀವು ಒಳ್ಳೆಯ ಪ್ರಜೆಯಲ್ಲ, ಅವಹೇಳನಕಾರಿ ಭಾಷೆ ಬಳಸಿದ್ದೀರಿ, ಇದು ವಾಕ್ ಸ್ವಾತಂತ್ರ‍್ಯ ವ್ಯಾಪ್ತಿಯಲ್ಲಿಲ್ಲ ಎಂದು ಆಕ್ರೋಶ ಹೊರಹಾಕಿದೆ.

ಮುಂದುವರಿದು, ಹೈಕೋರ್ಟ್ ಹೇಳಿರುವುದರಲ್ಲಿ ತಪ್ಪೇನಿಲ್ಲ, ಮೊದಲು ನೀವು ಮಾತನಾಡುವುದು ನಿಲ್ಲಿಸಿ, ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ, ಸದ್ಯಕ್ಕೆ ಒಂದೆರಡು ತಿಂಗಳುಗಳ ಕಾಲ ನೀವು ವಿಜಯಪುರಕ್ಕೆ ಭೇಟಿ ನೀಡುವ ಅಗತ್ಯ ಇಲ್ಲ ಎಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.
 
ಗುಪ್ತಚರ ಇಲಾಖೆ ಮಾಹಿತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮೀಜಿಯನ್ನು ವಿಜಯಪುರ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಧಿಕಾರಿಗಳು ನಿರ್ಬಂಧಿಸಿದ್ದರು. ಇದನ್ನು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಹೈಕೋರ್ಟ್ ಸ್ವಾಮೀಜಿ ಹೇಳಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿ, ನಿರ್ಬಂಧ ನಿರ್ಧಾರ ಸರಿಯಾಗಿದೆ ಎಂದು ಹೇಳಿತು. ಹೈಕೋರ್ಟ್ ಕೂಡ ಅನುಮತಿ ನಿರಾಕರಿಸಿದ ಹಿನ್ನೆಲೆ ಶ್ರೀಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow