ಹೆಂಡತಿಗೆ ಇಂಜೆಕ್ಷನ್ ಕೊಟ್ಟು ಕೊಲೆಗೈದ ಡಾಕ್ಟರ್ ಗಂಡ! 6 ತಿಂಗಳ ನಂತರ ಬಯಲಾಯ್ತು ಅಸಲಿ ಸತ್ಯ 

ಅಕ್ಟೋಬರ್ 15, 2025 - 16:01
 0  16
ಹೆಂಡತಿಗೆ ಇಂಜೆಕ್ಷನ್ ಕೊಟ್ಟು ಕೊಲೆಗೈದ ಡಾಕ್ಟರ್ ಗಂಡ! 6 ತಿಂಗಳ ನಂತರ ಬಯಲಾಯ್ತು ಅಸಲಿ ಸತ್ಯ 

ಬೆಂಗಳೂರು: ಸೈನಿಕರು ಗಡಿಗಳನ್ನು ರಕ್ಷಿಸಿದರೆ, ವೈದ್ಯರನ್ನು ರೋಗಗಳ ವಿರುದ್ಧ ಹೋರಾಡುವ ಮತ್ತು ಅಸಂಖ್ಯಾತ ವ್ಯಕ್ತಿಗಳ ಜೀವಗಳನ್ನು ಉಳಿಸುವ ಸೈನಿಕರು ಎಂದು ಪರಿಗಣಿಸಲಾಗುತ್ತದೆ. ಆದ್ರೆ ಇಲ್ಲೊಬ್ಬ ವೈದ್ಯ ಮಾಡಿರೋ ಕೆಲಸ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ.

ಹೌದು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವೈದ್ಯ ಪತಿಯೊಬ್ಬ ತನ್ನ ಪತ್ನಿಯ ಆರೋಗ್ಯ ಸಮಸ್ಯೆಗಳಿಂದ ಬೇಸತ್ತು, ಇಂಜೆಕ್ಷನ್ ನೀಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಫೆಲೊಷಪಿ ಮಾಡ್ತಿದ್ದ ಡಾ. ಮಹೇಂದ್ರ ರೆಡ್ಡಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಪತ್ನಿ ಡಾ.ಕೃತಿಕಾ ರೆಡ್ಡಿ ಸಾವನ್ನಪ್ಪಿದ ವೈದ್ಯೆಯಾಗಿದ್ದಾರೆ. 

2024ರ ಮೇ 26ರಂದು ಡಾ.ಮಹೇಂದ್ರರೆಡ್ಡಿ ಮತ್ತು ಡಾ.ಕೃತಿಕಾರೆಡ್ಡಿ ವಿವಾಹ ನಡೆದಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿದ್ದ ಡಾ.ಕೃತಿಕಾರೆಡ್ಡಿ, ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವಿಷಯ ಮುಚ್ಚಿಟ್ಟು ಕುಟುಂಬಸ್ಥರು ಅದೇ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿದ್ದ ಡಾ.ಮಹೇಂದ್ರರೆಡ್ಡಿಗೆ ಮದುವೆ ಮಾಡಿಕೊಟ್ಟಿದ್ದರು. ಆದರೆ, ಆ ಬಳಿಕ ಹೆಂಡತಿಯ ಆರೋಗ್ಯ ಸಮಸ್ಯೆ ವಿಷಯ ಪತಿಗೆ ಗೊತ್ತಾಗಿತ್ತು.

ಪ್ರತಿದಿನ ವಾಂತಿ, ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಯನ್ನು ಕೊಲ್ಲಲು ಮಹೇಂದ್ರರೆಡ್ಡಿ ಪ್ಲ್ಯಾನ್​ ಮಾಡಿದ್ದ. ಹುಷಾರಿಲ್ಲದೆ ತವರುಮನೆಯಲ್ಲಿ  ವೈದ್ಯೆ ಡಾ.ಕೃತಿಕಾರೆಡ್ಡಿ ಮಲಗಿದ್ದ ವೇಳೆ ಅಲ್ಲಿಗೆ ಬಂದಿದ್ದ ಈತ ಆಕೆಗೆ ಐವಿ ಇಂಜೆಕ್ಷನ್ ಮೂಲಕ ಎರಡು ದಿನ ಒಂದಷ್ಟು ಔಷಧ ನೀಡಿದ್ದ. ಬಳಿಕ ಜ್ಞಾನ ತಪ್ಪಿದ್ದ ಕೃತಿಕಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದಾಗಲೇ ಅವರು ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದರು.

ಘಟನೆ ಬಗ್ಗೆ ಅಸ್ಪತ್ರೆಯಿಂದ ಡೆತ್ ಮೆಮೊ ಬಂದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಈ ಬಗ್ಗೆ ದೂರು ನೀಡುವಂತೆ ತಿಳಿಸಿದ್ದರು. ಕುಟುಂಬಸ್ಥರ ದೂರಿನ ಅನ್ವಯ ಯುಡಿಆರ್ ದಾಖಲು ಮಾಡಿದ್ದ ಮಾರತಹಳ್ಳಿ ಪೊಲೀಸರು, ಮೃತ ದೇಹದ ಸ್ಯಾಂಪಲ್ ಪಡೆದು FSLಗೆ ಕಳುಹಿಸಿದ್ದರು.

ಈಗ ಅದರ ವರದಿ ಕೈಸೇರಿದ್ದು, ಕೃತಿಕಾ ಸಾವಿಗೆ ದೇಹದಲ್ಲಿ ಕಂಡುಬಂದಿರುವ ಅನಸ್ತೇಶಿಯಾ ಅಂಶ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಯುಡಿಆರ್​ ಆಗಿದ್ದ ಪ್ರಕರಣವನ್ನು ಕೊಲೆ ಕೇಸ್​ ಆಗಿ ಪರಿವರ್ತಿಸಿರೋ ಪೊಲೀಸರು ಆರೋಪಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow