ಹೈಕೋರ್ಟ್ ಮೆಟ್ಟಿಲೇರಿದ RSSಗೆ ಬಿಗ್ ಶಾಕ್: ಪಥಸಂಚಲನಕ್ಕೆ ಅವಕಾಶ ನೀಡದ ನ್ಯಾಯಾಲಯ
ಕಲಬುರಗಿ: ಚಿತ್ತಾಪುರ ತಾಲೂಕಿನ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮತ್ತು ದಲಿತ ಸಂಘಟನೆಗಳು ನಡೆಸಲು ಉದ್ದೇಶಿಸಿದ್ದ ರ್ಯಾಲಿ ಮತ್ತು ಪಥಸಂಚಲನಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಇಂದು ಪಥಸಂಚಲನ ನಡೆಸಲು ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅನುಮತಿ ನೀಡದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಎಂ. ಜಿ. ಎಸ್. ಕಮಲ್ ಅವರ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, “ಕಾನೂನು ಸುವ್ಯವಸ್ಥೆ ಕಾಪಾಡಲು ಒಂದೇ ದಿನ, ಒಂದೇ ಸ್ಥಳ ಮತ್ತು ಒಂದೇ ಮಾರ್ಗದಲ್ಲಿ ಹಲವು ಸಂಘಟನೆಗಳು ರ್ಯಾಲಿ ನಡೆಸಲು ಅವಕಾಶ ನೀಡುವುದು ಅಸಾಧ್ಯ” ಎಂದು ವಾದಿಸಿದರು. ಇದನ್ನು ಪರಿಗಣಿಸಿದ ಹೈಕೋರ್ಟ್, ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳಲ್ಲಿ ರ್ಯಾಲಿ ನಡೆಸುವ ಅವಕಾಶ ಕಲ್ಪಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ.
ಅದೇ ವೇಳೆ, ಹೊಸದಾಗಿ ಮನವಿ ಸಲ್ಲಿಸುವಾಗ ರ್ಯಾಲಿ ಯಾವ ಮಾರ್ಗದಲ್ಲಿ ನಡೆಯಲಿದೆ ಎಂಬುದನ್ನು ವಿವರವಾಗಿ ತಿಳಿಸಿ ಜಿಲ್ಲಾಡಳಿತ ಹಾಗೂ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳಿಗೆ ಸಲ್ಲಿಸಬೇಕೆಂದು ನ್ಯಾಯಾಲಯ ತಿಳಿಸಿದೆ. ಹೀಗೆಯೇ ಜಿಲ್ಲಾ ಮತ್ತು ತಾಲೂಕು ಆಡಳಿತ ಕಾನೂನು ಪ್ರಕಾರ ಕ್ರಮ ಕೈಗೊಂಡು, ಅದರ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ. ಈ ವೇಳೆ ಆರ್ಎಸ್ಎಸ್, ಭೀಮ್ ಆರ್ಮಿ ಎರಡೂ ಸಂಘಟನೆಗಳಿಗೆ ಪ್ರತ್ಯೇಕ ಸಮಯ ನಿಗದಿಪಡಿಸಲು ಹೈಕೋರ್ಟ್ ಸೂಚನೆ ನೀಡಿದೆ. ನ.2ರಂದು ಆರ್ಎಸ್ಎಸ್ ಪಥಸಂಚಲನ ನಡೆಸಲು ಅರ್ಜಿದಾರರು ಒಪ್ಪಿಗೆ ಸೂಚಿಸಿದ್ದಾರೆ. ವಿಚಾರಣೆಯನ್ನು ಅಕ್ಟೋಬರ್ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.
ನಿಮ್ಮ ಪ್ರತಿಕ್ರಿಯೆ ಏನು?